ಬೆಂಗಳೂರು/ ನವದೆಹಲಿ: ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಇತ್ಯರ್ಥಪಡಿಸಿದೆ.
ವಿಚಾರಣೆ ಬಾಕಿ ಇರುವ ಹಿನ್ನೆಲೆ ಹೈಕೋರ್ಟ್ ಮುಂದೆಯೇ ಈ ಅಂಶವನ್ನು ಪ್ರಾಸ್ತಪಿಸುವಂತೆ ನ್ಯಾಯಾಲಯ ಹೇಳಿದೆ. ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಪಂಕಜ್ ಮಿಥಲ್ ಮತ್ತು ಎಸ್ವಿಎನ್ ಭಟ್ಟಿ ಅವರ ಪೀಠ ವಿಚಾರಣೆ ನಡೆಸಿತು. ಹಿರಿಯ ವಕೀಲ ಮುಕುಲ್ ರೋಹಟ್ಗಿ ಮತ್ತು ವಕೀಲರಾದ ಬಾಲಾಜಿ ಶ್ರೀನಿವಾಸನ್ ಮತ್ತು ನಿಶಾಂತ್ ಎವಿ ವಾದ ಮಂಡಿಸಿದರು.
ಹೆಚ್.ಡಿ.ಕುಮಾರಸ್ವಾಮಿ ಪರ ವಾದಿಸಿದ ವಕೀಲರು, ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ನಾವು ಪಕ್ಷಕಾರರಲ್ಲ ಅದಾಗ್ಯೂ ನೋಟಿಸ್ ನೀಡಲಾಗುತ್ತಿದೆ ಎಂದು ವಾದಿಸಿದರು. ಸರ್ಕಾರೇತರ ಸಂಸ್ಥೆ ಸಮಾಜ ಪರಿವರ್ತನ ಸಮುದಾಯದ ಪರವಾಗಿ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ಅರ್ಜಿದಾರರು ತೆರವು ಪ್ರಕ್ರಿಯೆಯನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಈಗಾಗಲೇ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಮಧ್ಯಪ್ರವೇಶ ಮಾಡಿದ ಪೀಠ, ಅರ್ಜಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಇದು ರಾಜಕೀಯ ಕಾರಣಗಳಿಗೂ ಇರಬಹುದು. ನಾವು ನಿಮಗೆ ಹೈಕೋರ್ಟ್ಗೆ ಹೋಗಲು ಸ್ವಾತಂತ್ರ್ಯ ನೀಡಬಹುದು. ಯಾವುದೇ ಪಕ್ಷಗಳು ಇಲ್ಲಿ ಪೂರ್ವಾಗ್ರಹಕ್ಕೆ ಒಳಗಾಗಬಾರದು ಎಂದು ನಾವು ಬಯಸುತ್ತೇವೆ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥ ಪಡಿಸಿತು