ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.
ಸಂಭಾವನೆ ಇಲ್ಲದೇ ಯಾವುದೇ ಸಂಭಾವನೆ ಇಲ್ಲ: ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ವನ ಮಹೋತ್ಸವ: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದ್ದು, ಕಳೆದ 2 ವರ್ಷಗಳಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದ್ದು, ಅರಣ್ಯ ಪ್ರದೇಶ, ರಸ್ತೆಬದಿ ಮತ್ತು ಸರ್ಕಾರಿ ಜಾಗದಲ್ಲಿ ಸುಮಾರು 8.5 ಕೋಟಿ ಸಸಿಗಳನ್ನು ನೆಟ್ಟು, ಪೋಷಿಸಲಾಗಿದೆ. 2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 1,20,975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ. ಕಳೆದ 2 ವರ್ಷದಲ್ಲಿ ಕೃಷಿಕರಿಗೆ ತಮ್ಮ ಜಮೀನಿನಲ್ಲಿ ನಾಟಿ ಮಾಡಲು ಮತ್ತು ಇತರ ಜಮೀನಿನಲ್ಲಿ ನೆಡಲು ಒಟ್ಟಾರೆ 3.70 ಕೋಟಿ ಸಸಿಗಳನ್ನು ವಿತರಣೆ ಮಾಡಲಾಗಿದೆ ಎಂದೂ ಸಚಿವರು ತಿಳಿಸಿದರು.
ಮಾದಪ್ಪನಹಳ್ಳಿಯಲ್ಲಿ ಬೃಹತ್ ಉದ್ಯಾನ ನಿರ್ಮಾಣ: ಬೆಂಗಳೂರಿನಲ್ಲಿ ಶ್ವಾಸತತಾಣಗಳನ್ನು ಉಳಿಸಲು, ಬೆಳೆಸಲು ಸರ್ಕಾರ ನಿರ್ಧರಿಸಿದ್ದು, ಯಲಹಂಕ ಬಳಿಯ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶದಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಲಾಲ್ಬಾಗ್ ಹೈದರಾಲಿಯ ಕಾಲದಲ್ಲಿ ನಿರ್ಮಾಣವಾಗಿತ್ತು, ಕಬ್ಬನ್ ಪಾರ್ಕ್ ಬ್ರಿಟಿಷರ ಕಾಲದಲ್ಲಿ ರೂಪುಗೊಂಡಿತು. ಶತಮಾನವೇ ಕಳೆದರೂ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ಆಗಲಿಲ್ಲ. ಹೀಗಾಗಿ ತಾವು ಅರಣ್ಯ ಸಚಿವನಾದ ತರುವಾಯ ನೀಲಗಿರಿ ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಿದ್ದ 153 ಎಕರೆ ಜಮೀನನ್ನು ಜೂ.2ರಂದು ಮರಳಿ ಅರಣ್ಯ ಇಲಾಖೆಗೆ ಪಡೆದು ಅಲ್ಲಿ ಉದ್ಯಾನ ನಿರ್ಮಿಸಲಾಗುವುದು, 2 ತಿಂಗಳಲ್ಲಿ ಇದರ ಶಂಕುಸ್ಥಾಪನೆ ನೆರವೇರಲಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ 128 ಎಕರೆ ಅರಣ್ಯ ಒತ್ತುವರಿ ತೆರವು: ಬೆಂಗಳೂರು ಮಹಾನಗರದಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇಲ್ಲಿ ಹಲವು ದಶಕದಿಂದ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ತಾವು ಸಚಿವನಾದ ತರುವಾಯ 2 ವರ್ಷದಲ್ಲಿ ಸುಮಾರು 4,000 ಕೋಟಿ ರೂ. ಮಾರುಕಟ್ಟೆ ಮೌಲ್ಯದ 128 ಎಕರೆ ಅರಣ್ಯ ಒತ್ತುವರಿಯನ್ನು ತೆರವು ಮಾಡಿಸಿರುವುದಾಗಿ ಈಶ್ವರ್ ಖಂಡ್ರೆ ತಿಳಿಸಿದರು.
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಣ ರಾಯಭಾರಿಯಾಗಿ ನನ್ನನ್ನು ನೇಮಿಸಿದಕ್ಕಾಗಿ ಕರ್ನಾಟಕ ಸರ್ಕಾರ ಮತ್ತು ಅರಣ್ಯ ಸಚಿವರಿಗೆ ಶ್ರೀ @eshwar_khandre ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಮ್ಮ ರಾಜ್ಯದ ಸಸ್ಯ ಹಾಗೂ ಪ್ರಾಣಿಗಳಲ್ಲಿನ ವೈವಿಧ್ಯತೆಯ ಬಗ್ಗೆ ಜಾಗೃತಿ ಮೂಡಿಸಲು,ವನ್ಯಜೀವಿ ಸಂರಕ್ಷಣೆ ಮತ್ತು… https://t.co/cxdsOJohar
— Anil Kumble (@anilkumble1074) May 27, 2025