ಮಂಡ್ಯ :- ಮಂಡ್ಯದಲ್ಲಿ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದ ಪರಿಣಾಮ ಬೈಕ್ ನಿಂದ ಬಿದ್ದು ಮೃತಪಟ್ಟ ಮಗುವಿನ ಮನೆಗೆ ಮದ್ದೂರು ಶಾಸಕ ಕೆ.ಎಂ.ಉದಯ್ ಬುಧವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಅಶೋಕ್ ಅವರ ಮನೆಗೆ ಶಾಸಕ ಕೆ.ಎಂ.ಉದಯ್ ಭೇಟಿ ನೀಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ, ನೋವು ಕಂಡು ಶಾಸಕರು ದುಃಖಿತರಾದರು.
ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲೇ ಸೂಕ್ತ ಚಿಕಿತ್ಸೆ ನೀಡಿದ್ದರೆ, ಪೋಷಕರು ಮಂಡ್ಯದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ, ಇಂತಹ ದುರ್ಘಟನೆಯೂ ಸಂಭವಿಸುತ್ತಿರಲಿಲ್ಲ ಎಂದು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿಗಳ ವಿರುದ್ಧ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶಾಸಕರೆದುರು ದೂರುಗಳ ಸುರಿಮಳೆಗೈದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಂಡಿದ್ದು, ಮೂವರು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ತನಿಖೆಯ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ನಾಯಿ ಕಡಿತಕ್ಕೆ ಮದ್ದೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲೆ ಸೂಕ್ತ ಚಿಕಿತ್ಸೆ ನೀಡದೇ ಮತ್ತು ವೈದ್ಯರು ತುರ್ತಾಗಿ ಮಗುವನ್ನು ಮಂಡ್ಯ ಆಸ್ಪತ್ರೆಗೆ ಕಳುಹಿಸಲು ಆಂಬುಲೆನ್ಸ್ ವ್ಯವಸ್ಥೆಯನ್ನು ಸಹ ಮಾಡದಿರುವುದೇ ಅಪಘಾತಕ್ಕೆ ವೈದ್ಯರು ಸಹ ಪರೋಕ್ಷವಾಗಿ ಕಾರಣವಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಹೀಗಾಗಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಬಾಲಕೃಷ್ಣರನ್ನು ಅಮಾನತು ಮಾಡಲು ಆರೋಗ್ಯ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಪೋನ್ ಮೂಲಕ ಸಂಪರ್ಕಿಸಿ, ಅಮಾನತುಗೊಳಿಸುವಂತೆ ವಿನಂತಿಸಲಾಗಿದೆ ಎಂದು ತಿಳಿಸಿದರು.
ಮಗು ರಿತೀಕ್ಷ ಅವರ ಕುಟುಂಬಕ್ಕೆ ನಮ್ಮ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾತ್ಕಾಲಿಕವಾಗಿ ಆರ್ಥಿಕ ನೆರವು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹೆಚ್ಚಿನ ಸಹಾಯವನ್ನು ಸರ್ಕಾರದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.
ಇದೇ ವೇಳೆ ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು, ಮನ್ ಮುಲ್ ನಿರ್ದೇಶಕ ಹರೀಶ್, ಗ್ರಾ.ಪಂ ಮಾಜಿ ಅಧ್ಯಕ್ಷರಾದ ಪಿ.ರಾಘವ, ಮಧುಕುಮಾರ್, ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ