ಬೆಂಗಳೂರು: ಕ್ರಿಕೆಟ್ ಸಂಭ್ರಮದ ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ.ವೈ.ವಿಜಯೇಂದ್ರ ಬರೆದ ಪತ್ರದಲ್ಲೇನಿದೆ?
ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ನೀವು ಮತ್ತು ನಿಮ್ಮ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ. ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ.
ಕುಟುಂಬ ಬೆಳಗಬೇಕಿದ್ದ. ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ ಎಂದಿದ್ದಾರೆ.
ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ, ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ. ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ‘ಸರ್ಕಾರಕ್ಕೂ ಈ ಘಟನೆಗೂ ಸಂಬಂಧವಿಲ್ಲ. ಸರ್ಕಾರ ಈ ಘಟನೆಯ ಜವಾರಿಯನ್ನು ಹೊರಲಾಗದು’ ಎಂಬ ನಿಮ್ಮ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ. ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಿಮ್ಮ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಆದ್ದರಿಂದ ಇದರಲ್ಲಿ ಸರ್ಕಾರದ ಯಾವ ತಪ್ಪಿಲ್ಲ. ದುರ್ಘಟನೆ ನಡೆದಿರುವುದು ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ಎಂದು ಹೇಳಿಕೆ ನೀಡಿದ್ದೀರಿ. ಸುದೀರ್ಘ ರಾಜಕಾರಣ ಹಾಗೂ ಅಧಿಕಾರದ ಅನುಭವ ಹೊಂದಿರುವ ನಿಮ್ಮ ಬಾಯಿಂದ ಹೊರಟಿರುವ ಇಂಥಾ ಮಾತುಗಳಿಂದಾಗಿ ನಿಮ್ಮ ಪ್ರಬುದ್ಧತೆಯನ್ನು ನಾವು ಶಂಕಿಸುವಂತಾಗಿದೆ ಎಂದು ಹೇಳಿದ್ದಾರೆ.
ನಿಮ್ಮ ಹೇಳಿಕೆಯಿಂದಾಗಿ ನೀವು ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಯೋ ಎಂಬ ಪ್ರಶ್ನೆ ಕಾಲ್ತುಳಿತದಲ್ಲಿ ನೊಂದವರು ಕೇಳುತ್ತಿದ್ದಾರೆ. ಪೊಲೀಸರ ರಕ್ಷಣೆ ನಿಮಗೆ, ನಿಮ್ಮ ಮಂತ್ರಿ ಮಂಡಲಕ್ಕೆ, ನಿಮ್ಮ ಕುಟುಂಬಕ್ಕೆ, ನಿಮ್ಮ ಅಧಿಕಾರಿಗಳಿಗೆ ಮಾತ್ರ ಹೊರತೂ ಸ್ಟೇಡಿಯಂ ಬಳಿಯ ದುರಂತದಲ್ಲಿ ಸಾವು-ನೋವು ಅನುಭವಿಸಿದ ಜನಸಾಮಾನ್ಯರಿಗಲ್ಲ ಎಂಬುದು ನಿಮ್ಮ ಮಾತಿನ ಧಾಟಿಯಲ್ಲಿ ವ್ಯಕ್ತವಾಗುತ್ತಿದೆ.
ಕೂಗಳತೆಯ ದೂರದಲ್ಲಿ ಈ ದುರಂತ ಘಟನೆ ನಡೆದರೂ ಎರಡು ಗಂಟೆಯ ಅಂತರದವರೆಗೂ (3.50 ರಿಂದ 5.45) ತಮಗೆ ದುರಂತದ ಕುರಿತು ಮಾಹಿತಿ ಸಿಗಲಿಲ್ಲ ಎಂಬ ನಿಮ್ಮ ಹೇಳಿಕೆ ಗಮನಿಸಿದರೆ ಆಡಳಿತ ವ್ಯವಸ್ಥೆ ನಿಮ್ಮ ಕೈತಪ್ಪಿ ದಿಕ್ಕೆಟ್ಟು ಹೋಗಿದೆ ಎಂಬುದು ವೇದ್ಯವಾಗುತ್ತದೆ. ಇಂತಹ ದುರ್ಬಲ ಸಮರ್ಥನೆಯ ಮೂಲಕ ನೀವು ಜವಾಬ್ದಾರಿಯಿಂದ ನುಣುಚಿಕೊಳ್ಳಲಾಗದು ಎಂದಿದ್ದಾರೆ.