ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದೆ. ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ಮಾತನಾಡಿದರು.
ನಮ್ಮ ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.
ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು ಎಂದು ಬಣ್ಣಿಸಿದರು.
ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದರು.
ಸಿದ್ದರಾಮಯ್ಯ ಇಳಿಸೋಕೆ ಷಡ್ಯಂತ್ರ: ರೆಬೆಲ್ ಶಾಸಕ ಯತ್ನಾಳ್ ಹೊಸ ಬಾಂಬ್
ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು(own) ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ ಎಂದು ಪತ್ರ ಬರೆದಿದ್ದರು. ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.
ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ
ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.