ಬೆಂಗಳೂರು/ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಘಟನೆಯಿಂದ ಹುಬ್ಬಳ್ಳಿಯಲ್ಲಿ ನಿನ್ನೆ ಪ್ರತಿಭಟನೆ ಕಾವು ಜೋರಾಗಿತ್ತು. ಅಲ್ಲದೇ ಆರೋಪಿ ಪೊಲೀಸರ ಎನ್ಕೌಂಟರ್ ನಲ್ಲಿ ಬಲಿ ಆಗಿದ್ದಾನೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಕೇಸ್ಗೆ ಸಂಬಂಧಿಸಿದಂತೆ ಕಾಮುಕ ಆರೋಪಿಯನ್ನು ಎನ್ಕೌಂಟರ್ ಮಾಡಲಾಗಿದೆ. ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿಯಾಗಿದ್ದಾನೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದಾನೆ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ.
ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಅನ್ನಪೂರ್ಣ ಅವರು ಹಾರಿಸಿದ ಗುಂಡು ಎದೆಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದಿದೇ ಆರೋಪಿ ರಿತೇಶ್ ಜೀವ ಹೋಗಿದೆ.