ಬೆಂಗಳೂರು: ಕಾಂಗ್ರೆಸ್ ಪುಡಾರಿಗಳು ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಟನ್ ಗಟ್ಟಲೆ ದಾಖಲೆಗಳಿವೆ ಎಂಬ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್ನ ಪುಡಾರಿಗಳು ಬೆದರಿಕೆ ಹಾಕುತ್ತಿದ್ದಾರೆ.
ನನ್ನ ದನಿಯನ್ನು ಅಡಗಿಸುವ ಕೆಲಸ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಹೆದರುವ ವ್ಯಕ್ತಿಯೂ ನಾನಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡಿ ಲಾರಿಯಲ್ಲಿ ದಾಖಲೆಗಳನ್ನು ತಂದು ಕೊಡುತ್ತಾರಂತೆ. ತಂದು ಕೊಡಲಿ, ನಾನೂ ನೋಡುತ್ತೇನೆ. ಯಾವ ಮಟ್ಟದಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಕಾಂಗ್ರೆಸ್ ಪುಡಾರಿಗಳು ಎನ್ನುವುದು ನನಗೆ ಗೊತ್ತಿದೆ ಎಂದು ಕಿಡಿಕಾರಿದರು.
ಮೈತ್ರಿ ಸರ್ಕಾರದ ಅವಧಿಯಲ್ಲಿ ಸಾಲ ಮನ್ನಾ ಮಾಡಿದಾಗ ಜನರ ಮೇಲೆ ತೆರಿಗೆ ಹಾಕಲಿಲ್ಲ. ಆದರೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಾಗಿ ಬೆಲೆ ಏರಿಕೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಎರಡು ಲಕ್ಷ ಕೋಟಿ ರು. ಸಾಲ ಮಾಡಿದ್ದು, ಇದೇ ಸರ್ಕಾರ ಮುಂದುವರೆದರೆ 10 ಲಕ್ಷ ಕೋಟಿ ರು. ಸಾಲ ಮಾಡಲಿದೆ.
ಹಿಂದೆ ಮುಖ್ಯಮಂತ್ರಿಯಾಗಿದ್ದ ವೇಳೆ ಕೇಂದ್ರದ ಮುಂದೆ ಹೋಗಿ ಭಿಕ್ಷೆ ಬೇಡಲಿಲ್ಲ. ಜನತೆ ಕೊಟ್ಟ ತೆರಿಗೆ ಹಣವನ್ನೇ ಬಳಸಲಾಯಿತು. ಕಾಂಗ್ರೆಸ್ ಸರ್ಕಾರ ಪ್ರತಿ ನಿತ್ಯ ಬೆಲೆ ಏರಿಕೆ ಮಾಡುತ್ತಿದೆ. ಜನರು ಸಂಕಷ್ಟಕ್ಕೊಳಗಾಗಿದ್ದು, ಕಾಂಗ್ರೆಸ್ಗೆ ಶಾಪ ಹಾಕುವ ಮಟ್ಟಕ್ಕೆ ಹೋಗಿದ್ದಾರೆ ಎಂದರು.