ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಮಧ್ಯೆ ಚಂಡೀಗಢದ ಮುಲ್ಲಾನ್ಪುರದಲ್ಲಿ ಇಂದು ಐಪಿಎಲ್ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಜಯಗಳಿಸಿದವರು ನೇರವಾಗಿ ಫೈನಲ್ ಪ್ರವೇಶಿಸಿದರೆ ಸೋತವರು ಭಾನುವಾರ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯವನ್ನು ಆಡಬೇಕಾಗುತ್ತದೆ.
ಆರ್ಸಿಬಿ ಈ ಬಾರಿ ಲೀಗ್ 14 ಪಂದ್ಯಗಳ ಪೈಕಿ 9 ರಲ್ಲಿ ಗೆದ್ದಿದೆ. ಮಳೆಯಿಂದ ಬೆಂಗಳೂರಿನ ಪಂದ್ಯ ರದ್ದಾಗಿದ್ದರಿಂದ ಒಟ್ಟು 19 ಅಂಕ ಸಂಪಾದಿಸಿ 2ನೇ ಸ್ಥಾನ ಪಡೆದಿದೆ. ಪಂಜಾಬ್ ಸಮಾನ 19 ಅಂಕ ಪಡೆದರೂ ನೆಟ್ ರನ್ರೇಟ್ ಆಧಾರದಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಬಾರಿ ಮೂರನೇ ಬಾರಿ ಇತ್ತಂಡಗಳು ಮುಖಾಮುಖಿಯಾಗುತ್ತಿವೆ. ಲೀಗ್ ಮುಖಾಮುಖಿಯಲ್ಲಿ ಎರಡು ತಂಡಗಳು ಒಂದೊಂದು ಪಂದ್ಯವನ್ನು ಗೆದ್ದಿವೆ.
ಐಪಿಎಲ್ ಪುನಾರಂಭದ ಬಳಿಕ ಆರ್ಸಿಬಿಯಲ್ಲಿ ಗಾಯದ ಸಮಸ್ಯೆ ಹೆಚ್ಚಾಗಿದೆ. ವೇಗಿ ಜೋಶ್ ಹೇಜಲ್ವುಡ್ ಫಿಟ್ ಆಗಿದ್ದು, ಈ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಟಿಮ್ ಡೇವಿಡ್ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಗೈರಾಗಲಿದ್ದಾರೆ ಎನ್ನಲಾಗುತ್ತಿದೆ. ನಾಯಕ ರಜತ್ ಪಾಟೀದಾರ್ ಗಾಯದ ಸಮಸ್ಯೆ ಜೊತೆಗೆ ಲಯದ ಸಮಸ್ಯೆ ಎದುರಿಸುತ್ತಿದ್ದಾರೆ.
ಕಳೆದ ಬಾರಿ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಕೋಲ್ಕತ್ತಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಬಾರಿಯೂ ಶ್ರೇಯಸ್ ಅಯ್ಯರ್ ತಂಡವನ್ನು ಪ್ಲೇ ಆಫ್ವರೆಗೆ ತಲುಪಿಸಿದ್ದಾರೆ. ತಂಡ ಎಲ್ಲಾ ವಿಭಾಗದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದು ತವರಿನಲ್ಲಿ ಆರ್ಸಿಬಿಯನ್ನು ಮಣಿಸುವ ಲೆಕ್ಕಾಚಾರದಲ್ಲಿದೆ