ಬೆಂಗಳೂರು:- ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್, ಇಬ್ಬರು ಕಾನ್ಸ್ಟೇಬಲ್ ಸೇರಿ 7 ಜನರ ಮೇಲೆ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಪ್ರತಿಷ್ಠಿತ ಏರಿಯಾದಲ್ಲಿ ಇದ್ದ 4 ಕೋಟಿ ರೂ. ಮೌಲ್ಯದ ಮನೆಯನ್ನು ಕೇವಲ 60 ಲಕ್ಷ ರೂ.ಗೆ ಕಬಳಿಸಲು ಮುಂದಾಗಿದ್ದ ಸಿಎಂ ಚಿನ್ನದ ಪದಕ ಪಡೆಯಲು ಆಯ್ಕೆಯಾಗಿದ್ದ ಇನ್ಸ್ಪೆಕ್ಟರ್ ಎ.ವಿ. ಕುಮಾರ್ ಸೇರಿದಂತೆ ಅನ್ನ ಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಹಾಗೂ ಇತರೆ ನಾಲ್ವರು ಖಾಸಗಿ ವ್ಯಕ್ತಿಗಳು ಸೇರಿದಂತೆ 7 ಜನರ ವಿರುದ್ಧ ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇನ್ಸ್ಪೆಕ್ಟರ್ ಎ ವಿ ಕುಮಾರ್ ಎ1 ಆರೋಪಿ, ಎಸ್ ಬಿ ಕಾನ್ಸ್ಟೇಬಲ್ ಉಮೇಶ್ ಹಾಗೂ ಮತ್ತೊಬ್ಬ ಕಾನ್ಸ್ಟೇಬಲ್ ಅನಂತ್ ಮೇಲೆ ಎಫ್ಐಆರ್ ದಾಖಲಾಗಿದೆ. ಮೂವರು ಸರ್ಕಾರಿ ನೌಕರರು, ಹಾಗು ನಾಲ್ವರು ಖಾಸಗಿ ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಾಗಿದೆ.
ಚೆನ್ನೇಗೌಡ ನೀಡಿದ ದೂರಿನ ಮೇಲೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ ಕಲಂ 7a ಅಡಿ ಎಫ್ಐಆರ್ ದಾಖಲಾಗಿದೆ. ಭ್ರಷ್ಟ ಅಥವಾ ಕಾನೂನುಬಾಹಿರ ವಿಧಾನಗಳಿಂದ ವೈಯಕ್ತಿಕ ಪ್ರಭಾವ ಬೀರುವುದು. ಹಾಗು ಅನಗತ್ಯ ಪ್ರಯೋಜನ ಪಡೆಯುವ ಅಪರಾಧವನ್ನು 7a ಅಡಿ ಉಲ್ಲೇಖ ಮಾಡಲಾಗಿದೆ.
ಮೂರು ವರ್ಷಗಳಿಗಿಂತ ಕಡಿಮೆಯಿಲ್ಲದ ಏಳು ವರ್ಷಗಳಿಗೆ ಜೈಲು ಶಿಕ್ಷೆ ಮತ್ತು ದಂಡ ಒಳಗೊಂಡ 7a ಸೆಕ್ಷನ್ ವಿಧಿಸಬಹುದಾಗಿದೆ. ಕಳೆದ ವಾರವಷ್ಟೆ ಅನ್ನಪೂರ್ಣೇಶ್ವರಿ ಠಾಣೆ ಮೇಲೆ ಲೋಕಾಯುಕ್ತ ದಾಳಿ ಮಾಡಿತ್ತು. ಹಾಗೂ ಹೊಟೇಲ್ ಮೇಲೆ ದಾಳಿ ನಡೆಸಿ ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕಡಿಮೆ ಬೆಲೆಗೆ ಬಿಲ್ಡಿಂಗ್ ಬರೆದು ಕೊಡಲು ಖಾಕಿ ಒತ್ತಡ ಹಾಕಿದ್ದರು. ಹೊಟೇಲ್ ಒಂದರಲ್ಲಿ ಇಬ್ಬರು ಕಾನ್ಸ್ಟೇಬಲ್ ಗಳಿಂದ ಈ ಡೀಲ್ ನಡೆದಿತ್ತು. ಈ ವೇಳೆ ಲೋಕಾಯುಕ್ತ ಪೊಲೀಸರ ಟ್ರ್ಯಾಪ್ ಕಾರ್ಯಾಚರಣೆ ನಡೆಸಿದೆ.
ಅಲ್ಲದೇ ಮನೆಗೆ ನುಗ್ಗಿ ಧಮ್ಕಿ ಹಾಕಿದ್ದ ಬಗ್ಗೆ ವಿಡಿಯೋ ಬಿಡುಗಡೆ ಮಾಡಲಾಗಿದೆ. ಇದೀಗ ಎಫ್ಐಆರ್ ದಾಖಲಿಸಿ ಲೋಕಾಯುಕ್ತ ಪೊಲೀಸರು, ತನಿಖೆ ಚುರುಕುಗೊಳಿಸಿದರು.
ಇನ್ನೂ ಸಿಎಂ ಮೆಡಲ್ ಗೆ ಆರೋಪಿ ಇನ್ಸ್ಪೆಕ್ಟರ್ ಎ ವಿ ಕುಮಾರ್ ಅಯ್ಕೆಯಾಗಿದ್ದರು. ಲೋಕಾ ದಾಳಿ ಬಳಿಕ ಪದಕ ವಿತರಣೆ ಕಾರ್ಯಕ್ರಮಕ್ಕೆ ಗೈರಾಗಿದ್ದರು.