ಚಿಕ್ಕೋಡಿ : ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧವೇ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಬೆಳಗಾವಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆಯಾ ಅನ್ನೋ ಪ್ರಶ್ನೆ ಮೂಡಿದೆ.
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಶರಣ ಅವಜಿ ವಿರುದ್ಧ ಸಾರ್ವಜನಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ಸ್ಪೆಕ್ಟರ್ ಶಿವಶರಣ ಅವಜಿ ಅವರು ದಲಿತರ ಬಳಿ ಕೇಸ್ ಸಂಬಂಧಿಸಿದಂತೆ ಒಂದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದ್ದು, ದಲಿತ ವಿರೋಧಿ ಇನ್ಸ್ಪೆಕ್ಟರ್ ಶಿವಶರಣ ಅವಜಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಪುರಸಭೆಯಿಂದ ಪೊಲೀಸ್ ಸ್ಟೇಷನ್ವರೆಗೂ ಪಾದಯಾತ್ರೆ ನಡೆಸಿದ ದಲಿತ ಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಸ್ಟೇಷನ್ ಎದುರು ಪ್ರತಿಭಟನೆ ನಡೆಸಿದರು. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಆಗಮಿಸುವಂತೆ ಪಟ್ಟು ಹಿಡಿದಿದ್ದರು.