ಬೆಂಗಳೂರು: RSS ಮತ್ತು BJP ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿ ನಿಂತು, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಸೈದ್ದಾಂತಿಕ ಹೋರಾಟವನ್ನು ಮುನ್ನಡೆಸಬೇಕು ಎಂದು ಸಿಎಂ ಕರೆ ನೀಡಿದರು.
ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸಿದ್ದನ್ನು, ಅಂಬೇಡ್ಕರ್ ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ ಎನ್ನುವುದನ್ನು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಜನರಿಗೆ, ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು ಎಂದರು.
ಬಿಜೆಪಿಯವರಿಗೆ ಸಾರ್ವಕರ್ ಮತ್ತು ಗಾಂಧಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ. ಆದರೆ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎನ್ನುವ ಮೂರು ಮಂತ್ರಗಳನ್ನು ನಮಗೆ ನೀಡಿದ ಅಂಬೇಡ್ಕರ್ ನಮ್ಮವರು, ಇವರು ನಮಗೆ ಬೇಕು ಎಂದರು.
ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ರಚಿಸಲಾಗುವುದು ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.
ಪ್ರಧಾನಿ ಮೋದಿಗೆ ಸವಾಲೆಸೆದ ಸಿಎಂ
ನಾವು ರಾಜ್ಯದಲ್ಲಿ ಜಾರಿಗೆ ತಂದಿರುವ scp/tsp ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವಾ ಎಂದು ಪ್ರಶ್ನಿಸಿದ ಪ್ರಧಾನಿ ಮೋದಿ ಅವರಿಗೆ ಸಿಎಂ ನೇರ ಸವಾಲು ಹಾಕಿದರು. ರಾಷ್ಟ್ರಮಟ್ಟದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದು ತೋರಿಸಿ ಎಂದು ಸವಾಲು ಹಾಕಿದರು.